ಬೆಂಗಳೂರು, ಸೆ. 17: ಡ್ರಗ್ಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಡ್ರಗ್ಸ್ ಹಗರಣದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಿದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಆದ್ದರಿಂದ ಇಡೀ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ಪ್ರತಿಪಾದಿಸಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಬಂಧನ ಆಗಿಲ್ಲ. ಈ ಕುರಿತಾಗಿ ಪೊಲೀಸರಲ್ಲಿ ವಿಚಾರಿಸಿದ್ದೇನೆ. ಕೆಲವರನ್ನು ಅರೆಸ್ಟ್ ಮಾಡಿಲ್ಲ ಯಾಕೆ ಎಂದು ಕೇಳಿದೆ. ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೆಲ್ಲಾ ಗಮನಿಸಿದರೆ ಪೊಲೀಸರ ಮೇಲೆ ಸರ್ಕಾರದ ಒತ್ತಡ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಪ್ರಕರಣದ ಸತ್ಯಾಸತ್ಯತೆ ಹೊರಬರುವ ನಿಟ್ಟಿನಲ್ಲಿ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.







































































