ಬೆಂಗಳೂರು, ಸೆ. 24 : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಮತ್ತೆ ಲಾಕ್ ಡೌನ್ ಹೇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಚಿಂತನೆ ಸರ್ಕಾರಕ್ಕಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳನ್ನು ಜನರು ನಂಬಬಾರದು ಎಂದು ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ಅಲ್ಲದೆ ಪ್ರಧಾನಿ ಮೋದಿ ಅವರೊಂದಿಗೂ ಲಾಕ್ಡೌನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆಗಳೂ ನಡೆದಿಲ್ಲ. ಜನಜೀವನವೂ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ಡೌನ್ ಮಾಡುವುದಿಲ್ಲ ಎಂದಿದ್ದಾರೆ.

ಜೊತೆಗೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದರಿಂದ ಜನಸಾಮಾನ್ಯರು ಸರ್ಕಾರ ಈಗಾಗಲೇ ತಿಳಿಸಿರುವ ಎಲ್ಲಾ ರೀತಿಯ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಇದೇ ವಿಚಾರವನ್ನು ಪ್ರಧಾನಿ ಮೋದಿ ಅವರೂ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ತಿಳಿಸಿರುವುದಾಗಿ ಸುಧಾಕರ್ ಮಾಹಿತಿ ನೀಡಿದ್ದಾರೆ.

































































