ಬೆಂಗಳೂರು,ಸೆ. 26: ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಅವಧಿ ಮೊಟಕುಗೊಳಿಸುವ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ (ತಿದ್ದುಪಡಿ) ಮಸೂದೆಗೆ ವಿಧಾನಸಭೆಯಲ್ಲಿ ಸರ್ಕಾರ ಶುಕ್ರವಾರ ಒಪ್ಪಿಗೆ ಪಡೆಯಿತು.
ರಮೇಶ್ ಕುಮಾರ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಗ್ರಾಮ ಸ್ವರಾಜ್ ಕಾಯ್ದೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ತಂದು ಅಧ್ಯಕ್ಷರ ಅವಧಿಯನ್ನು ಐದು ವರ್ಷಕ್ಕೆ ಏರಿಸಲಾಗಿತ್ತು. ಇದೀಗ ತಂದಿರುವ ತಿದ್ದುಪಡಿ ಪ್ರಕಾರ, ಅಧಿಕಾರದ ಅವಧಿ ಎರಡೂವರೆ ವರ್ಷಕ್ಕೆ ಇಳಿಯಲಿದೆ.
ಮಸೂದೆ ಮಂಡಿಸಿದ ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ‘ಹಲವು ಪ್ರಕರಣಗಳಲ್ಲಿ ಹೈಕೋರ್ಟ್ ಆದೇಶ ಹಾಗೂ ಅಡ್ವೊಕೇಟ್ ಜನರಲ್, ಹಣಕಾಸು ಇಲಾಖೆಯ ಸಲಹೆಯ ಮೇರೆಗೆ ಕ್ಷೇತ್ರಗಳ ಮೀಸಲಾತಿ ಅವಧಿಯನ್ನು ಐದು ವರ್ಷ ಮಾಡಲಾಗುತ್ತಿದೆ’ಎಂದರು.

ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್, ‘ನಮ್ಮ ಸಮಿತಿ ವರದಿ ನೀಡಿದ ಬಳಿಕ ನಮ್ಮದೇ ಸರ್ಕಾರ ಅದನ್ನು ಜಾರಿ ಮಾಡಲಿಲ್ಲ. ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕೆ ಬಂದಾಗ ಈ ವಿಷಯವನ್ನು ಗಮನಕ್ಕೆ ತಂದೆ’ ಎಂದರು.
ಮೀಸಲಾತಿಯಲ್ಲಿ 10 ಪಂಗಡಗಳಿವೆ. 10 ವರ್ಷ ಮೀಸಲಾತಿ ಇಟ್ಟರೆ ಅವರು ಲಾಭ ಪಡೆಯಲು ಕನಿಷ್ಠ 70 ವರ್ಷ ಕಾಯಬೇಕು. ತಿದ್ದುಪಡಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆಂದು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.


































































