ಕಾರ್ಕಳ, ಅ. 31: ಏಕತೆಯ ಹರಿಕಾರ, ದಿಟ್ಟ ನಿರ್ಧಾರಗಳಿಂದ ಉಕ್ಕಿನ ಮನುಷ್ಯನೆಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಾಯಿ ಪಟೇಲರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಮತ್ತು ಐಕ್ಯತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಸ್ವಾತಂತ್ರ್ಯದ ನಂತರ ದೇಶವನ್ನು ಒಗ್ಗೂಡಿಸಲು ಹಾಗೂ ದೇಶದ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದು ಭಾರತೀಯರಿಗೆ ಆದರ್ಶಪ್ರಾಯವಾಗಿದ್ದರು. ಪಟೇಲರ ತತ್ವ ಆದರ್ಶಗಳು ಇಂದಿಗೂ ಜೀವಂತವಾಗಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ಪೂಜಾರಿ ಹೇಳಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕ ಲಿಯೋ ಕ್ಲಬ್ ಅಬ್ಬನಡ್ಕದ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಜರಗಿದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಉದಯ ಅಂಚನ್ ಅವರು ಸರ್ದಾರ್ ವಲ್ಲಭಭಾಯ್ ಪಟೇಲರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗಿಸಿದರು. ಇದೇ ಸಂದರ್ಭದಲ್ಲಿ ಲಿಯೋ ಕ್ಲಬ್ಬಿನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಏಕತಾ ಪ್ರಮಾಣವಚನ ಬೋಧಿಸಿದರು.ಸಂಘದ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಾಷ್ಟ್ರೀಯ ಏಕತಾ ದಿನಾಚರಣೆ






































































