ಬೆಂಗಳೂರು, ನ.10 : ಕೊರೋನಾದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದ್ದು, ಈ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಕೊರೊನಾ ಪಿಡುಗಿನಿಂದ ದೇಶ ತತ್ತರಿಸಿದೆ. ಈ ಸಮಯದಲ್ಲಿ ಎಲ್ಲರೂ ಮಾನವೀಯತೆಗೆ ಗೌರವ ತೋರಿ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದೇವೆ.ಈ ಸಮಸ್ಯೆಯಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.ಉದ್ಯಮ ನಡೆಸುತ್ತಿರುವವರಿಂದ ಸಣ್ಣ ವ್ಯಾಪಾರಿಗಳವರೆಗೂ,ಉದ್ಯೋಗದಾತರಿಂದ ಉದ್ಯೋಗಿಗಳವರೆಗೂ,ಪ್ರತಿ ವರ್ಗದ ಜನ ಸಂಕಷ್ಟ ಎದುರಿಸುತ್ತಿದ್ದಾರೆ.ಜನ ಕೆಲಸ ಇಲ್ಲದೆ, ಆದಾಯ ಇಲ್ಲದೆ ಕಂಗಾಲಾಗಿದ್ದಾರೆ.ಜನರ ನೆರವಿಗಾಗಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿತ್ತು.ಇದರಲ್ಲಿ ಯಾರಿಗೆ ಸಹಾಯವಾಗಿದೆ ಎಂದು ಕೇಳಿದ್ದೆವು. ಆದರೆ ಸರ್ಕಾರ ಇದನ್ನು ತಿಳಿಸಲಿಲ್ಲ ಎಂದು ಆರೋಪಿಸಿದರು.
ಈ ಸಮಯದಲ್ಲಿ ಪಾಲಿಕೆ,ಪಂಚಾಯ್ತಿ ಮಟ್ಟದಲ್ಲಿ ಒಂದು ವರ್ಷ ಆಸ್ತಿ ತೆರಿಗೆ ರದ್ದು ಮಾಡಿ ಎಂದು ಕೇಳಿದೆವು. ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ.ಈ ಮಧ್ಯೆ ಎಲ್ಲ ವಹಿವಾಟಿಗೂ ಸರ್ಕಾರ ನಿರ್ಬಂಧ ಹೇರಿತ್ತು.ಎಲ್ಲರೂ ಇದಕ್ಕೆ ಸಹಕಾರ ನೀಡಿದ್ದರು.ರಾಜ್ಯದಲ್ಲಿ ಮಳೆ ಹೆಚ್ಚಾದಾಗ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಹೆಚ್ಚಾಗಿ ಉತ್ಪಾದನೆ ಮಾಡುವುದನ್ನು ನಾವು ನೋಡಿದ್ದೇವೆ.ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಿಸಲು ಸ ರ್ಕಾರ ಕೆಇಆರ್ ಸಿಗೆ ತಿಳಿಸಿತ್ತು.ನಂತರ ಸಂಸ್ಥೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಿಸಿದೆ.ನಾನು ಪಕ್ಷದ ಪರವಾಗಿ ,ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ,ಈ ಜನ ವಿರೋಧಿ ನಿರ್ಧಾರವನ್ನು ಖಂಡಿಸುತ್ತೇನೆ.ಇದು ಕೈಗಾರಿಕೆ,ವ್ಯಾಪಾರಿ, ರೈತರು ಹಾಗೂ ಮಧ್ಯಮ ವರ್ಗದ ಜನರ ವಿರುದ್ಧ ಈ ತೀರ್ಮಾನ ಕೈಗೊಳ್ಳಲಾಗಿದೆ.ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.
ವಿದ್ಯುತ್ ದರ ಏರಿಕೆ ಹಿಂಪಡೆಯದಿದ್ದರೆ ಪ್ರತಿಭಟನೆ : ಸರಕಾರಕ್ಕೆ ಡಿಕೆಶಿ ಎಚ್ಚರಿಕೆ







































