ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ, ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ನೇಮಕಗೊಂಡಿರುವ ಉಪ ಸಮಿತಿ ಇಂದು ನಿರ್ದೇಶನ ನೀಡಿತು .
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರೌಡಳಿತ ಸಚಿವ ಎಂ.ಟಿ. ಬಿ. ನಾಗರಾಜ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಸಚಿವ ಬಿ. ಶ್ರೀರಾಮುಲು ಅವರುಗಳು ಸಮಿತಿಯ ಸದಸ್ಯರಿದ್ದಾರೆ.
ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಾಗಿ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳು, ಅನುದಾನಿತ ತಾಂತ್ರಿಕ ಕಾಲೇಜು ಹಾಗೂ ವಿವಿಧ ವಿವಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 446 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿದಂತೆ ಒಟ್ಟು 882 ಹುದ್ಗೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು.
ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಕ್ರಮ : ಗೋವಿಂದ ಕಾರಜೋಳ
