ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಔಷಧ ಮಳಿಗೆಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು. ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು ಎಂದು ಹೇಳಿದರು.
ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಇತರೆ ರಾಜ್ಯಗಳಲ್ಲಿ ಔಷಧಗಳ ದರ ಪರಿಶೀಲಿಸಿ ನೇರವಾಗಿ ಔಷಧ ಉತ್ಪಾದಕರೊಂದಿಗೆ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಒಂದು ವರ್ಷದೊಳಗೆ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಸುಧಾರಿಸಲು ಸಮಗ್ರ ಪೌಷ್ಠಿಕಾಂಶ ಕಾರ್ಯಕ್ರಮವನ್ನು ರೂಪಿಸುವಂತೆ ಹಾಗೂ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದೂ ಸೂಚಿಸಿದರು.
ಪೌಷ್ಠಿಕಾಂಶದ ಮಟ್ಟವನ್ನು ಸುಧಾರಿಸಲು ಅಗತ್ಯವಾದ ಹಣವನ್ನು ಪಡೆಯಿರಿ ಮತ್ತು ಒಂದು ವರ್ಷದೊಳಗೆ ಈ ನಿಟ್ಟಿನಲ್ಲಿ ಗಮನಾರ್ಹ ಬದಲಾವಣೆಯನ್ನು ತರುವಂತೆ ಹೇಳಿದರು.
ಬಳಿಕ ಅಗತ್ಯವಿರುವ ಜಿಲ್ಲೆಗಳಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಸೂಚನೆ ನೀಡಿದ ಬೊಮ್ಮಾಯಿ ಅವರು, ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷದ ಇಂಟರ್ನ್ಶಿಪ್ ಕಡ್ಡಾಯಗೊಳಿಸುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯುವಂತೆ ವೈದ್ಯಕೀಯ ಶಿಕ್ಷಣ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಿಸಬೇಕು ಎಂದರು.