ಕುಕ್ಕುಂದೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬಳಿ ಮಕ್ಕಳ ಉದ್ಯಾನವನವನ್ನು ಅಭಿವೃದ್ಧಿ ಮಾಡುವ ಸಲುವಾಗಿ ಮತ್ತು ನಕ್ರೆ ರಂಗನಪಲ್ಕೆ ರಸ್ತೆ ಅಭಿವೃದ್ಧಿಗಾಗಿ ಒಟ್ಟು 87 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸಿ ಫೆ.೧೮ ರಂದು ಬೆಳಿಗ್ಗೆ 9.00 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾರ್ಕಳ ತಾಲೂಕಿನಾದ್ಯಂತ ಪ್ರತಿ ಗ್ರಾಮದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕುಕ್ಕುಂದೂರು ಗ್ರಾಮಲ್ಲಿಯೂ ಹಲವಾರು ಅಭಿವೃದ್ಧಿ ಕಾರ್ಯಗಳು ಜರುಗುತ್ತಿದೆ. ಈಗಾಗಲೇ ಸಾಕಷ್ಟು ಬೇಡಿಕೆಗಳಿದ್ದು ಎಲ್ಲವನ್ನು ಮುಂದಿನ ದಿನಗಳಲ್ಲಿ ಈಡೇರಿಸಲು ಸಹಕರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಶಶಿಮಣಿ ಸಂಪತ್, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಐಸಿರ, ತಾ. ಪಂ. ಮಾಜಿ ಸದಸ್ಯ ಅಶೋಕ್ ಶೆಟ್ಟಿ, ಗ್ರಾ. ಪಂ. ಮಾಜಿ ಅಧ್ಯಕ್ಷರಾದ ಅಂತೋನಿ ಡಿʼ ಸೋಜಾ, ಸುಮನ ರಾವ್, ಜ್ಯೋತಿ ರಮೇಶ್, ಕಾಂಟ್ರ್ಯಾಕ್ಟರ್ ವಿಘ್ನೇಶ್ ರಾವ್, ಪಿಡಿಓ ಪ್ರದೀಪ್ ಶೆಟ್ಟಿ, ಗ್ರಾ. ಪಂ. ನ ಸರ್ವ ಸದಸ್ಯರು ಮತ್ತು ಸಿಬ್ಬಂದಿ, ಗ್ರಾಮದ ಹಿರಿಯ ಮುಖಂಡರು, ಜಯಂತಿ ನಗರ ಆಟೋ ರಿಕ್ಷಾ ಚಾಲಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.