ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ಮಾ. 25 ರಂದು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.
ಲಖನೌನದಲ್ಲಿ ನಡೆಯಲಿರುವ ಅದ್ದೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳು, ಮುಖೇಶ್ ಅಂಬಾನಿ ಸೇರಿದಂತೆ ಹಲವು ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ಕಂಗನಾ ರಣಾವತ್, ಬೋನಿ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರಿಗೂ ಅಹ್ವಾನ ನೀಡಲಾಗಿದೆ.
ಮಾ. 25ರ ಸಂಜೆ 4 ಗಂಟೆಗೆ ಲಖನೌದ 50 ಸಾವಿರ ಜನರು ಕುಳಿತುಕೊಳ್ಳಬಹುದಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಯೋಗ ಗುರು ಬಾಬಾ ರಾಮ್ ದೇವ್, ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ನಟ ಅನುಪಮ್ ಖೇರ್ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಉಗ್ರ ನಿಗ್ರಹ ಪಡೆ, ವಿಶೇಷ ಕಾರ್ಯಪಡೆ ಸಿಬ್ಬಂದಿಯೊಂದಿಗೆ ಸುಮಾರು 8 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.