ಕನ್ನಡವನ್ನು ಕಡೆಗಣಿಸಿದರೆ ಬೀಳಲಿದೆ ದಂಡ

ಬೆಂಗಳೂರು: ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಕನ್ನಡವನ್ನು ನಿರ್ಲಕ್ಷಿಸಿದರೆ ಜುಲ್ಮಾನೆ ಹಾಕುವ ನಿಯಮ ಇದರಲ್ಲಿರುವ ಪ್ರಮುಖ ಅಂಶ.
ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ ವಿ. ಸುನಿಲ್ ಕುಮಾರ್ ವಿಧೇಯಕವನ್ನು ಮಂಡಿಸಿದ್ದು, ಆಡಳಿತ ಕನ್ನಡ ಜಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಸೇರಿದಂತೆ ಶಿಸ್ತು ಕ್ರಮಗಳ ಅನುಷ್ಠಾನಕ್ಕಾಗಿ ವಿವಿಧ ಹಂತಗಳಲ್ಲಿ ಜಾರಿ ಪ್ರಾಧಿಕಾರ ರಚನೆ ಮಾಡುವುದಕ್ಕೆ ಈ ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ ಎಂದರು.
ದಂಡದ ಮೊತ್ತ ಎಷ್ಟು?
ಇದೆಲ್ಲಕ್ಕಿಂತ ಮುಖ್ಯವಾಗಿ ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ಈ ಕಾಯಿದೆಯ ಮೂಲಕ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ ಖಾಸಗಿ ವ್ಯಕ್ತಿ, ಕಾರ್ಖಾನೆ, ಸಂಘಟನೆಗಳಿಗೆ 5,000 ರೂ, ಎರಡನೇ ಬಾರಿಗೆ 10,000 ರೂ. ಹಾಗೂ ಮೂರನೇ ಬಾರಿಗೆ ತಪ್ಪೆಸಗಿದವರಿಗೆ 20,000 ರೂ.ವರೆಗೆ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಹಂತದಲ್ಲಿ ಜಾರಿಗೆ ತರುವ ಅಧಿಕಾರ ಜಾರಿ ಪ್ರಾಧಿಕಾರಕ್ಕೆ ನೀಡಲಾಗುತ್ತದೆ. ಸರಕಾರಿ ಅಧಿಕಾರಿಗಳು ಕನ್ನಡ ಜಾರಿ ವಿಚಾರದಲ್ಲಿ ಎಸಗುವ ತಪ್ಪನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ.
ಮುಖ್ಯವಾಗಿ ರಾಜ್ಯದಲ್ಲಿ ಭೂಮಿ, ತೆರಿಗೆ ರಿಯಾಯಿತಿ, ಅನುದಾನ ಹಾಗೂ ಇತರೆ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು, ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ.
ಕಾಯಿದೆಯ ಮುಖ್ಯಾಂಶಗಳು ಹೀಗಿವೆ
ಉನ್ನತ, ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಪರಿಚಯಿಸಿ ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವುದ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ , ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ, ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಶಾಸನಬದ್ಧ ಸಂಸ್ಥೆಗಳು, ಸಹಕಾರ ಸಂಘಗಳ ನೇಮಕ ಪ್ರಕ್ರಿಯೆಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ, ಅಧೀನ ನ್ಯಾಯಾಲಯ ಹಾಗೂ ನ್ಯಾಯ ಮಂಡಳಿಗಳಲ್ಲಿ ಕನ್ನಡ ಭಾಷಾ ಬಳಕೆ.ಕನ್ನಡದ ಬಳಕೆ ಮತ್ತು ಪ್ರಸಾರಕ್ಕೆ ನೀತಿ, ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆಗೆ ಕ್ರಮ ಇತ್ಯಾದಿ ನಿಯಮಗಳನ್ನು ಇದರಲ್ಲಿ ಸೇರಿಸಿಕೊಳ್ಳಲಾಗಿದೆ.













































































































































































error: Content is protected !!
Scroll to Top