ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಹಿರಿಯ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ಮಹಿಳೆಯರು ನಿಗೂಢವಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತಿಪ್ಪಜ್ಜಿ (75), ಅವರ ಪುತ್ರಿಯರಾದ ಪುತ್ರಿಯರಾದ ಮಾರಕ್ಕ (45) ಹಾಗೂ ದ್ಯಾಮಕ್ಕ (43) ಮೃತಪಟ್ಟವರು. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ತಾಯಿ ಮತ್ತು ಇಬ್ಬರು ಪುತ್ರಿಯರು ಮಾತ್ರ ಮನೆಯಲ್ಲಿದ್ದರು. ಬುಧವಾರ ರಾತ್ರಿ ಮಲಗಿದ್ದ ಇವರು ಗುರುವಾರ ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಿಟಕಿ ತೆರೆದು ನೋಡಿದಾಗ ಮಲಗಿದ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಪೊಲೀಸರು ಬಾಗಿಲು ಒಡೆದು ಪರಿಶೀಲಿಸಿದಾಗ ಮೂವರು ಮೃತಪಟ್ಟಿರುವುದು ಖಚಿತವಾಗಿದೆ. ತಿಪ್ಪಜ್ಜಿ ಪುತ್ರ ದ್ಯಾಮಣ್ಣ (47) ಅನಾರೋಗ್ಯ ಸಮಸ್ಯೆಯಿಂದ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದರು.
ಪತಿ ಕೆಂಚಪ್ಪ ಕೂಡ ವರ್ಷದ ಹಿಂದೆ ಕೊನೆಯುಸಿರೆಳೆದಿದ್ದರು. ಮಾರಕ್ಕ ಮತ್ತು ದ್ಯಾಮಕ್ಕ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡು ತವರು ಸೇರಿದ್ದರು. ಇದರಿಂದ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿತ್ತು. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಚಳ್ಳಕೆರೆ ಠಾಣೆಯ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.