ಒಂದೇ ಪ್ರಕರಣಕ್ಕೆ ಸಂಬಂಧಿಸಿ ಮೂರು ಕೇಸು ದಾಖಲು
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ ಸಂಭವಿಸಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಾಭರಣ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಯುವಕ ಮತ್ತು ಆತನ ಸಹೋದ್ಯೋಗಿ ಹಿಂದೂ ಮಹಿಳೆಯ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು ಮಹಿಳೆಯ ಪೋಷಕರ ಸಮ್ಮುಖದಲ್ಲಿ ಹಲ್ಲೆ ನಡೆಸಿದ್ದಾರೆ.ಉಳ್ಳಾಲದ ಲುಕ್ಮಾನ್ ಎಂಬ ಯುವಕನ ಜತೆ ಶೃಂಗೇರಿ ಸಮೀಪದ ಕೊಪ್ಪ ನಿವಾಸಿ ಯುವತಿ ಸುತ್ತಾಡುತ್ತಿದ್ದು ಈ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಗಿತ್ತು.
ಮಂಗಳವಾರ ಸಂಜೆ 10ಕ್ಕೂ ಹೆಚ್ಚು ಹಿಂದುತ್ವ ಕಾರ್ಯಕರ್ತರು ಚಿನ್ನಾಭರಣ ಅಂಗಡಿಗೆ ನುಗ್ಗಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯುವತಿಯ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಠಾಣೆಗೆ ಕರೆದೊಯ್ದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.
ಪೊಲೀಸ್ ಠಾಣೆಯಲ್ಲಿ ಈ ಸಂಬಂಧ 3 ಪ್ರಕರಣಗಳು ದಾಖಲಾಗಿದೆ ಎಂದು ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಯುವಕ ಹಲ್ಲೆ ಮತ್ತು ಯುವತಿ ಗಲಭೆಯ ಬಗ್ಗೆ ದೂರು ನೀಡಿದ್ದು, ಹಿಂದುತ್ವ ಕಾರ್ಯಕರ್ತರು ಮತ್ತು ಯುವತಿಯ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಮಧ್ಯೆ ಮುಸ್ಲಿಂ ಯುವಕ ತನ್ನನ್ನು ನಿಂದಿಸಿ ಗಂಭೀರ ಪರಿಣಾಮ ಬೀರುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯ ತಾಯಿ ದೂರಿದ್ದಾರೆ. ಆಭರಣ ಅಂಗಡಿಯವರು ಅತಿಕ್ರಮಿಸಿ ಗಲಾಟೆ ಮಾಡಿದ್ದಾರೆ ಎಂದು ದೂರಿದ್ದಾರೆ.