ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ
ಬೆಂಗಳೂರು: ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪ್ರಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು. ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ.
ಲಿಂಗಾಯತರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು ಅತ್ಯಂತ ಪ್ರಾಮಾಣಿಕರಿದ್ದರು. ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಎಚ್. ಪಟೇಲರು ಇವರೆಲ್ಲ ಪ್ರಾಮಾಣಿಕರಾಗಿದ್ದರು. ಆದರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟರಿದ್ದಾರೆ ಎಂದು ಹೇಳಿದ್ದೆ.
ಬಿಜೆಪಿಯವರು ನನ್ನ ಹೇಳಿಕೆಯನ್ನು ಕಟ್ ಮಾಡಿ ಸೇರಿಸಿ, ತಮಗೆ ಬೇಕಾದಂತೆ ತಿರುಚಿ ಚುನಾವಣೆ ಸಂದರ್ಭವಿರುವುದರಿಂದ ಅದರ ಲಾಭ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಲಿಂಗಾಯತ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಹಿಂದೆ ಬಹಳ ಜನ ಲಿಂಗಾಯತರು ಪ್ರಾಮಾಣಿಕ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದರು. ಆದರೆ ಬೊಮ್ಮಾಯಿ ಮಾತ್ರ ಭ್ರಷ್ಟರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟ್ಗಳನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದೆವು, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಮೇಲೆ ಮುಖ್ಯಮಂತ್ರಿ ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ನಾವೇನು ಮಾಡೋಕಾಗಲ್ಲ ಅಂತ ಹೇಳಿದ್ದಾರೆ.
ಬಿಜೆಪಿ ಕಿಡಿ

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.


































