ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದ. ಕ. ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ಸರಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದ. ಕ. ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು. ಅಲ್ಲದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರಕಾರ ಬಸವರಾಜ ಬೊಮ್ಮಾಯಿ ಸರಕಾರ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.




































