ಸಿದ್ಧತೆ ಆರಂಭಿಸಿದ ಚುನಾವಣಾ ಆಯೋಗ
ಬೆಂಗಳೂರು : ವಿಧಾನಸಭೆ ಚುನಾವಣೆಯ ಬಿಸಿ ಆರುವ ಮೊದಲೇ ಇನ್ನೊಂದು ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
ಮತಪಟ್ಟಿ, ಮತ ಕೇಂದ್ರಗಳ ತಯಾರಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆಯನ್ನು ನೀಡಿದೆ. ಇದರಿಂದ ಶೀಘ್ರ ಚುನಾವಣೆ ನಡೆಯುವ ಇದೆ ಎನ್ನಲಾಗುತ್ತಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ಜುಲೈ 4 ಕೊನೆಯ ದಿನ. ಜುಲೈ 7ರ ಒಳಗೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕೊನೆಯ ದಿನ. ಆದರೆ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲು ದಿನಾಂಕ ನಿಗದಿಪಡಿಸಿಲ್ಲ.
ಈಗಷ್ಟೇ ವಿಧಾನಸಭಾ ಚುನಾವಣೆ ಮುಗಿದು ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದರ ಬೆನ್ನಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಎರಡು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯದ ಹಿನ್ನೆಲೆ ಶೀಘ್ರ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ.
ಕರ್ನಾಟಕದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಅವಧಿ ಮುಗಿದು ಎರಡು ವರ್ಷಗಳಾಗಿವೆ. 2021ರ ಏಪ್ರಿಲ್ನಲ್ಲಿಯೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ, ಅವಧಿ ಮುಗಿದಿದ್ದರೂ ಚುನಾವಣೆ ನಡೆದಿರಲಿಲ್ಲ. ರಾಜ್ಯ ಸರ್ಕಾರ ವಿವಿಧ ಕಾರಣಗಳಿಂದ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಈಗ ಹೊಸ ಸರ್ಕಾರ ಬಂದ ಬೆನ್ನಲ್ಲಿಯೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಮತದಾರರ ಪಟ್ಟಿ, ಮತ ಕೇಂದ್ರಗಳ ಸಿದ್ಧತೆಗೆ ಸೂಚಿಸಿದೆ.
ಜಿಪಂ ಮತ್ತು ತಾಪಂ ಚುನಾವಣೆ ವಿಳಂಬ ಆಗಿರುವುದಕ್ಕೆ ಈಗಾಗಲೇ ರಾಜ್ಯ ಸರ್ಕಾರ ಹೈಕೋರ್ಟ್ಗೆ 5 ಲಕ್ಷ ರೂ. ದಂಡ ಕಟ್ಟಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್ ವಿಂಗಡಣೆ, ಮೀಸಲು ನಿಗದಿ ಪ್ರಕ್ರಿಯೆ ಮುಗಿದಿದೆ.
ವಿಧಾನಸಭಾ ಚುನಾವಣೆ ಮುಕ್ತಾಯದ ಬಳಿಕ ಜಿಪಂ ಮತ್ತು ತಾಪಂ ಚುನಾವಣೆ ನಡೆಸುತ್ತೇವೆ ಎಂದು ಹೈಕೋರ್ಟ್ಗೆ ಸರ್ಕಾರ ತಿಳಿಸಿತ್ತು. ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.














































































