ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪ
ಬೆಂಗಳೂರು: ಚುನಾವಣೆ ಸೋಲಿನ ಬಳಿಕ ಪಕ್ಷದ ನಾಯಕರ ವಿರುದ್ಧವೇ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡಪಾಟೀಲ್ ಯತ್ನಾಳ ಮತ್ತು ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಪಕ್ಷದ ನಾಯಕರ ಹೆಸರು ಉಲ್ಲೇಖಿಸದೆ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿ ಪಕ್ಷದ ಕಚೇರಿ ಕಾರ್ಪೊರೇಟ್ ಕಚೇರಿಯಂತಾಗಿದೆ. ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆ, ತಾಲೂಕು ಪಂಚಾಯತ್ ಚುನಾವಣೆಯನ್ನು ಎದುರಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಪಕ್ಷವನ್ನು ಸದೃಢಗೊಳಿಸುವತ್ತ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದರು. ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿತ್ತು ಎಂದೂ ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದರು.
ಕೆಲವು ನಾಯಕರ ನಡುವೆಯೇ ಸ್ಪರ್ಧೆ ಇದೆ. ಗ್ರಾಮ ಪಂಚಾಯತ್ ಚುನಾವಣೆ ಗೆಲ್ಲದವರೂ ಸಹ ನಮಗೆ ಮಾರ್ಗದರ್ಶನ ನೀಡುತ್ತಿದ್ದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರಾಜ್ಯದ ಸಹ ಉಸ್ತುವಾರಿಯಾಗಿ ನಮಗೆ ಮಾರ್ಗದರ್ಶನ ನೀಡಿದ್ದರು, ಅಣ್ಣಾಮಲೈ ಏನು ದೊಡ್ಡ ಹೀರೋನಾ? ಇಲ್ಲಿ ಬಂದು ಫೋಸ್ ಕೊಡುತ್ತಿದ್ದರು ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು.
ಬಸನಗೌಡ ಪಾಟೀಲ್ ಮತ್ತು ಸೋತಿರುವ ಮಾಜಿ ಸಚಿವ ಮುರುಗೇಶ್ ನಿರಾಣಿಯವರ ವಾಕ್ಸಮರವೂ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.































