ಗ್ಯಾರಂಟಿ ಜಾರಿಯಷ್ಟೇ ಆದ್ಯತೆ ಎಂದು ಉಪಮುಖ್ಯಮಂತ್ರಿ
ಬೆಂಗಳೂರು: ಚುನಾವಣೆ ಗೆಲ್ಲಲು ಸಹಕಾರಿಯಾದ ಐದು ಗ್ಯಾರಂಟಿಗಳ ಜಾರಿಗೆ ಹಣ ಬೇಕಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ಸರಕಾರ ಸ್ಪಷ್ಟವಾಗಿ ಹೇಳಿದೆ. ಈ ವರ್ಷ ಸರಕಾರದಿಂದ ಯಾವುದೇ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ, ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆಶಿ ಈ ಹೇಳಿಕೆ ನೀಡಿದ್ದಾರೆ.
ಐದು ಗ್ಯಾರಂಟಿಗಳ ಕಾರಣದಿಂದಾಗಿ ಸರ್ಕಾರ ಹಣಕಾಸಿನ ಇಕ್ಕಟ್ಟಿನಲ್ಲಿದೆ ಎಂಬುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸರ್ಕಾರದ ಪರಿಸ್ಥಿತಿ ವಿವರಿಸಲಾಗುವುದು. ನಾವು ಈ ವರ್ಷ 5 ಗ್ಯಾರಂಟಿಗಳಿಗಾಗಿ 40 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಹೀಗಾಗಿ ಈ ವರ್ಷ ನಾವು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನೀರಾವರಿ ಮತ್ತು ಸಾರ್ವಜನಿಕ ಕೆಲಸಗಳಲ್ಲಿಯೂ ಸಹ ಅಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಸಂಪುಟದ ಸಚಿವರಿಗೆ ತಾಳ್ಮೆಯಿಂದ ಇರುವಂತೆ ಸೂಚಿಸಿದ್ದಾರೆ ಎಂದರು.
ಹಿಂದಿನ ಸರ್ಕಾರ ದಿವಾಳಿ ಪರಿಸ್ಥಿತಿ ಸೃಷ್ಟಿಸಿದೆ. ಹೆಚ್ಚುವರಿ ಟೆಂಡರ್ ನೀಡಿ ಖಜಾನೆ ಖಾಲಿಯಾಗಿದೆ. ಆದರೆ ನಾವು ಗ್ಯಾರಂಟಿ ಭರವಸೆಗಳನ್ನು ಉಳಿಸಿಕೊಳ್ಳಬೇಕಾಗಿತ್ತು, ಅದರಂತೆ ನಾವು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ. ಶಾಸಕರಿಗೆ ಕ್ಷೇತ್ರಾಭಿವೃದ್ದಿ ನಿಧಿ ನೀಡುವುದು ಕೂಡ ಅಸಾಧ್ಯ. ಎಲ್ಲರೂ ತಾಳ್ಮೆಯಿಂದಿರಬೇಕು ಎಂದು ಮನವಿ ಮಾಡಿದ್ದಾರೆ.




















