ಮಂಡ್ಯ: ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದು ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ರಾತ್ರಿ 8.30ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಖಾ ನಾಲೆಗೆ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಕಾರು ಚಾಲಕ ಮನೋಜ್ ಮಾತ್ರ ಪಾರಾಗಿದ್ದಾರೆ.
ಮೃತ ಮಹಿಳೆಯರನ್ನು ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹಾದೇವಿ ಎಂದು ಗುರುತಿಸಲಾಗಿದೆ.
ಸ್ಥಳೀಯರು ಹಾಗೂ ಪೊಲೀಸರು ನಾಲ್ವರು ಮಹಿಳೆಯರ ಶವವನ್ನು ನಾಲೆ ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ.
ನಾಲೆಗೆ ಉರುಳಿದ ಕಾರು : ನಾಲ್ವರು ಮಹಿಳೆಯರ ಸಾವು

































