ಉಡುಪಿ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ : ಶರಣ್‌ ಪಂಪ್‌ವೆಲ್‌ ಸಹಿತ ಮೂವರು ವಿರುದ್ಧ ಕೇಸ್‌

ಉಡುಪಿ : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದು ಪರಿಷತ್‌ ಮುಖಂಡರಾದ ಶರಣ್ ಪಂಪ್‌ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್‌ವೆಲ್, ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೆ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕು ಎಂದು ಮಾತನಾಡಿದ್ದರು.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿ ನೀಡಿದ ದೂರಿನಂತೆ ಉಡುಪಿ ನಗರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನಾ ಮೆರವಣಿಗೆ ವೇಳೆ ಬಿಜೆಪಿ ಮಹಿಳಾ ಘಟಕದ ವೀಣಾ ಶೆಟ್ಟಿ ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಪ್ರವೇಶ ನೀಡಬಾರದು, ಮದರಸಾಗಳಿಗೆ ಹೋಗಲಿ’ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.













































































error: Content is protected !!
Scroll to Top