ಗೊಂದಲ ಮೂಡಿಸಿದ ಸರಕಾರದ ದಿಢೀರ್ ನಿರ್ಧಾರ
ಉಡುಪಿ : ನಗರದ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರು ಶೌಚಾಲಯದೊಳಗಿರುವಾಗ ವಿಡಿಯೋ ಶೂಟಿಂಗ್ ಮಾಡಿದ ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸರು ನಡೆಸುತ್ತಿರುವ ಸಂದರ್ಭದಲ್ಲಿಯೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ರಾಜ್ಯದಾದ್ಯಂತ ಈ ಪ್ರಕರಣದ ಬಗ್ಗೆ ತೀವ್ರ ಜನಾಕ್ರೋಶ, ಪ್ರತಿಭಟನೆಗೆ ಮಣಿದ ಸರಕಾರ ಈ ಹಿಂದೆ ತನಿಖಾಧಿಕಾರಿಯನ್ನು ಬದಲಾಯಿಸಿದ ಬಳಿಕ ಉಡುಪಿ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿ ಪ್ರಕರಣದ ಸಂತ್ರಸ್ತ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆ ಪಡೆಯುವ ಮೂಲಕ ಹಲವು ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು.
ಆರೋಪಿ ವಿದ್ಯಾರ್ಥಿನಿಯೊಬ್ಬಳ ತಂದೆ ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯ ಎಂಬ ಮಾಹಿತಿ ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಜಿಲ್ಲಾ ಪೊಲೀಸರ ತನಿಖೆ ಪೂರ್ಣಗೊಳ್ಳುವ ಮುನ್ನವೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ರಾಜ್ಯ ಸರಕಾರದ ನಡೆ ಗೊಂದಲ ಸೃಷ್ಟಿಸಿದೆ.
ಪ್ರಕರಣದ ಆರಂಭದ ದಿನದಿಂದಲೂ ಪೊಲೀಸ್ ಇಲಾಖೆಗೆ ಪ್ರತಿ ಹಂತದಲ್ಲೂ ಪ್ರಭಾವ ಬೀರುವ ಯತ್ನ ಮಾಡಿದ್ದ ಸರಕಾರ ಇದೀಗ ಆರೋಪಿಗಳನ್ನು ರಕ್ಷಿಸುವ ಸಲುವಾಗಿಯೇ ಸಿಐಡಿಗೆ ವರ್ಗಾಯಿಸಿದೆ ಎಂದು ನೇರ ಆರೋಪ ಮಾಡಿದ್ದಾರೆ.






































































