ಮುಂಜಾನೆ 3 ಗಂಟೆಗೆ ಮನೆಗೆ ನುಗ್ಗಿ ಬಂಧಿಸಿದ ಪೊಲೀಸರು
ವಿಶಾಖಪಟ್ಟಣಂ : ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಈ ಹಗರಣದ ತನಿಖೆಯನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಮೊದಲ ಆರೋಪಿ ಎಂದು ಹೆಸರಿಸಲಾಗಿದೆ.
ನಂದ್ಯಾಲ ವ್ಯಾಪ್ತಿಯ ಡಿಐಜಿ ರಘುರಾಮಿ ರೆಡ್ಡಿ ನೇತೃತ್ವದ ಪೊಲೀಸರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ನಾಯ್ಡು ಅವರಿದ್ದ ನಿವಾಸಕ್ಕೆ ದಾಳಿ ಮಾಡಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ರಾತ್ರಿಯಲ್ಲೂ ಟಿಡಿಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.