ಬೆಂಗಳೂರು : ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಇಲಾಖೆಯಲ್ಲಿ ಸುಧಾರಣೆ ಮಾಡುವುದಕ್ಕೆ ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿಯೇ ನಿರ್ವಹಣೆಯ ಜವಾಬ್ದಾರಿಯನ್ನು ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರಿಗೇ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ರಸ್ತೆ ಅಭಿವೃದ್ಧಿ ಮಾಡುವಾಗ ಕಳಪೆಯಾಗಿ ಮಾಡುತ್ತಾರೆ ಎಂಬ ಆರೋಪಗಳು ಹೆಚ್ಚಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ರಸ್ತೆಗಳನ್ನು ಅಭಿವೃದ್ಧಿ ಮಾಡಿದ ಗುತ್ತಿಗೆದಾರರೇ 5 ವರ್ಷಗಳ ಕಾಲ ತಾವು ಅಭಿವೃದ್ಧಿ ಮಾಡಿದ ರಸ್ತೆಗಳನ್ನು ನಿರ್ವಹಣೆ ಮಾಡಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಈ ನಿಯಮ ಜಾರಿಯಲ್ಲಿರಲಿಲ್ಲ. ಈಗ ಹೊಸದಾಗಿ ಈ ನಿಯಮ ಜಾರಿ ಮಾಡುತ್ತಾ ಇದ್ದೇವೆ. ಹಾಗಾಗಿ, ರಸ್ತೆಗಳ ನಿರ್ವಹಣೆಗಾಗಿ ಇನ್ನುಮುಂದೆ ಟೆಂಡರ್ ಕರೆಯುವ ಅವಶ್ಯಕತೆಯೂ ಇರುವುದಿಲ್ಲ. ಆದಾಯ ಬರುವ ಕಡೆ ಇನ್ವೆಸ್ಟ್ ಮಾಡಲು ಅವಕಾಶ ಇದೆ ಎಂದರು.