ಸಾಯುವ ಮುನ್ನ ಸಚಿವರ ಹೆಸರು ಉಲ್ಲೇಖಿಸಿ ಆಡಿಯೊ ರೆಕಾರ್ಡ್
ಬೆಂಗಳೂರು: ಕಾಂಗ್ರೆಸ್ನ ಇನ್ನೋರ್ವ ಸಚಿವರ ಮೇಲೆ ಕಿರುಕುಳದ ಆರೋಪ ಹೊರಿಸಲಾಗಿದೆ. ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಮೂರು ಆಡಿಯೋದಲ್ಲಿ ಹೇಳಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬೀಳುತ್ತದೆ. ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ಆತ್ಮಹತ್ಯೆಗೂ ಮುನ್ನ ಆತನನ್ನು ಥಳಿಸಲಾಗಿದೆ ಎಂದು ಪಕ್ಷ ಆರೋಪಿಸಿದೆ. ಘಟನೆಯ ಸತ್ಯಾಸತ್ಯತೆಗಳನ್ನು ಪರೀಶೀಲಿಸಲಾಗುತ್ತಿದ್ದು ಕಲಬುರಗಿಯ ಸುಲೆಪೇಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














































































