ಓರ್ವ ಮಹಿಳೆ ಸಾವು – ಇನ್ನಿಬ್ಬರ ಸ್ಥಿತಿ ಗಂಭೀರ
ಚಿಕ್ಕಮಗಳೂರು : ಕೂಲಿಗಾಗಿ ಸಾಗುತ್ತಿದ್ದ ಕಾರ್ಮಿಕರ ಗುಂಪಿಗೆ ಕಾಡಾನೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದ ಬಳಿ ನಡೆದಿದೆ. ದಾಳಿಯ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಮೀನಾ (43) ಮೃತಪಟ್ಟ ಮಹಿಳೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೀನಾ ಮತ್ತು ಇತರರು ತಮ್ಮ ಮನೆಯಿಂದ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೀನಾ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಈ ವೇಳೆ ಆಕೆಯ ತಲೆಯ ಮೇಲೆ ಆನೆ ಕಾಲಿಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂಟಿ ಆನೆಯೊಂದು ಕಳೆದ ತಿಂಗಳಿನಿಂದ ಹಿಂಡಿನಿಂದ ಬೇರ್ಪಟ್ಟು, ಜನವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಗಳಲ್ಲಿ ವಿಹರಿಸುತ್ತಾ ಜನರ ಜೀವಕ್ಕೆ ಗಂಭೀರ ಅಪಾಯವನ್ನುಂಟುಮಾಡಿದೆ. ತಿಂಗಳ ಹಿಂದೆಯೇ ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

















































































