ಹ್ಯಾಕರ್ಗಳ ಮೋಸದಾಟದಿಂದ ಜೈಲುಪಾಲಾಗಿದ್ದ ಅಮಾಯಕ ಯುವಕ
ಮಂಗಳೂರು: ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧಮುಕ್ತರಾಗಿದ್ದು, ಇಂದು ಸ್ವದೇಶಕ್ಕೆ ಆಗಮಿಸಲಿದ್ದಾರೆ.
ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದ ಚಂದ್ರಶೇಖರ್ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿದ್ದರು. 2022ರ ನವೆಂಬರ್ನಲ್ಲಿ ಮೊಬೈಲ್ ಮತ್ತು ಸಿಮ್ ಖರೀದಿಗೆ ರಿಯಾದ್ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಥಂಬ್ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು.
ಯಾಕೆ ಜೈಲು ವಾಸ?
ಚಂದ್ರಶೇಖರ್ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್ ಖಾತೆಗೆ 22 ಸಾವಿರ ರಿಯಲ್ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.
ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿ.ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಯ ಕೊನೆಯ ಪುತ್ರ ಚಂದ್ರಶೇಖರ್ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಗದಿಯಾಗಿತ್ತು. ಆ ಸಿದ್ಧತೆಯಲ್ಲಿ ಇರುವಾಗಲೇ ಅವರ ಬಂಧನವಾಗಿತ್ತು. ಚಂದ್ರಶೇಖರ್ ಅವರ ಸ್ನೇಹಿತರು 10 ಲಕ್ಷ ರೂ. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂ. ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ, ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್ ಅವರ ಬಿಡುಗಡೆಗೆ ಕೈಜೋಡಿಸಿತ್ತು.