ಕಾರ್ಕಳ: ವಿದ್ಯಾರ್ಥಿನಿಯರು ತಮ್ಮ ಮನಸ್ಸಿನ ಭಾವನೆಗಳನ್ನು, ಸಮಸ್ಯೆಗಳನ್ನು ಆಪ್ತರ ಜೊತೆಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ಅಲ್ಲದೆ ಪೋಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಭಾವನೆಗಳನ್ನು ಗೌರವಿಸಬೇಕು. ದ್ವೇಷವೆಂಬುವುದು ಯಶಸ್ಸಿಗೆ ತಡೆಗೋಡೆ. ಆದ್ದರಿಂದ ದ್ವೇಷವನ್ನು ತಮ್ಮ ಗುರಿಯಾಗಿ ಪರಿವರ್ತಿಸಬೇಕು. ನಾನು ಏನು ಬೇಕಾದರೂ ಸಾಧಿಸಬಲ್ಲೆ ಎಂಬ ಮನೋಭಾವ ಮೈಗೂಡಿಸಿಕೊಳ್ಳಬೇಕು. ತನ್ಮೂಲಕ ಹೆಣ್ಣು ಮಕ್ಕಳು ಕಿಶೋರಾವಸ್ಥೆಯ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ನೆಮ್ಮದಿಯ ಜೀವನವನ್ನು ನಡೆಸಬೇಕು ಎಂದು ಮನಶಾಸ್ತ್ರಜ್ಞೆ ಹಾಗೂ ಸಮಾಲೋಚಕಿ ಡಾ. ಐಶ್ವರ್ಯ ಹೇಳಿದರು.
ಅವರು ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಹೆಣ್ಣು ಮಕ್ಕಳ ಸುರಕ್ಷತೆ ಎಂಬ ವಿಷಯದ ಕುರಿತಾದ ಒಂದು ದಿನದ ವಿಶೇಷ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಸಂಸ್ಥೆಯ ಆಪ್ತ ಸಮಾಲೋಚಕಿ ಸಿಸ್ಟರ್ ಚಾರ್ಲೆಟ್ ಸಿಕ್ವೇರಾ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ ಉಪಸ್ಥಿತರಿದ್ದರು.



































