1 ಕೋಟಿ ಮನೆಗಳಿಗೆ ಸೋಲಾರ್ ಪ್ಯಾನಲ್ ಅಳವಡಿಸುವ ಬೃಹತ್ ಯೋಜನೆ
ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆಯಾದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೂರ್ಯೋದಯ ಯೋಜನೆ ಘೋಷಿಸಿದ್ದಾರೆ. ರಾಮ್ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಂತರ ಮೋದಿ ಘೋಷಿಸಿದ ಮೊದಲ ಯೋಜನೆಯಿದು.
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಜನರು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ. ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳ ಮೇಲ್ಛಾವಣಿ ಮೇಲೆ ಸೋಲಾರ್ ಅಳವಡಿಸಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರ 1 ಕೋಟಿ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದಿದ್ದಾರೆ.
ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯು ಹೊಸ ಯುಗದ ಆಗಮನದ ಸಂಕೇತವಾಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಮುಂದಿನ 1000ಕ್ಕೂ ಹೆಚ್ಚು ವರ್ಷಗಳು ಬಲಿಷ್ಠ, ಭವ್ಯ ಮತ್ತು ದೈವಿಕ ಭಾರತದ ಅಡಿಪಾಯವನ್ನು ಹಾಕಲು ಜನರಿಗೆ ಕರೆ ನೀಡಿದ್ದಾರೆ.


































