ವಿಧಾನಸಭೆ ಚುನಾವಣೆ ಬಳಿಕ ಮೊದಲ ಭೇಟಿ
ಬೆಂಗಳೂರು: ಲೋಕಸಭಾ ಚುನಾವಣೆ ಕೆಲವೆ ತಿಂಗಳು ಬಾಕಿ ಉಳಿದಿರುವಾಗಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ವಿಧಾನಸಭೆ ಸಭೆ ಚುನಾವಣೆ ಬಳಿಕ ಅಮಿತ್ ಶಾ ಅವರ ಇದೇ ಮೊದಲ ರಾಜ್ಯ ಪ್ರವಾಸವಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇಂದು ಅಮಿತ್ ಶಾ (Amit Shah) ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್ಗೆ ತೆರಳಲಿರುವ ಅಮಿತ್ ಶಾ ಫೆ.11 ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಫೆ.11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ.



















