ಕಾರ್ಕಳ : ನುಡಿದಂತೆ ನಡೆಯುವುದು ಕಾಂಗ್ರೆಸ್ ಸಂಸ್ಕೃತಿ. ಕಳೆದ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕಾಂಗ್ರೆಸ್ ಮೇಲಿದ್ದ ಜನರ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಇದು ಲೋಕಸಭಾ ಚುನಾವಣೆಯ ಗೆಲುವಿನ ಮುನ್ಸೂಚನೆ ಎಂದು ವಿಧಾನ ಪರಿಷತ್ ಸದಸ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.
ಅವರು ಏ. 17ರಂದು ಲೋಕಸಭಾ ಚುನಾವಣಾ ಪ್ರಚಾರದ ಪ್ರಯುಕ್ತ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಬೂತ್ಗಳಿಗೆ ಬೇಟಿ ನೀಡಿದ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತಾನಾಡಿ, ಕಳೆದ ವಿಧಾನಸಬಾ ಚುನಾವಣೆಯಲ್ಲಿ 135 ಸೀಟುಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಒಟ್ಟು ಜನಶಕ್ತಿಯ ಸರಿ ಸುಮಾರು 44 ಶೇಕಡಾ ಮತಗಳಿಕೆಯೊಂದಿಗೆ ದಾಖಲೆ ಸೃಷ್ಠಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಇದು ಪುನರಾವರ್ತನೆಯಾಗಲಿದ್ದು ಕನಿಷ್ಟ 22 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ. ದೇಶದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೆಸ್ ಅನಿವಾರ್ಯ ಎಂಬ ಸತ್ಯ ಜನರ ಅರಿವಿಗೆ ಬಂದಿದೆ ಎಂದು ಹೇಳಿದರು.
ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ – ಉದಯ್ ಕುಮಾರ್ ಶೆಟ್ಟಿ
ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ (ಇಂಡಿಯ ಒಕ್ಕೂಟ) ಅಧಿಕಾರಕ್ಕೆ ಬಂದ ಕೂಡಲೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಎಲ್ಲ ಭಾಗ್ಯಗಳ ಭರವಸೆಗಳನ್ನು ಮುಖ್ಯವಾಗಿ ನಾರಿ ನ್ಯಾಯದಡಿ 1 ಲಕ್ಷ ರೂ., ಯುವ ನ್ಯಾಯದಡಿ ಯುವ ಉದ್ಯಮಿಗಳಿಗೆ ಉತ್ತೇಜನ ನೀಡಲು ಪ್ರತಿ ಜಿಲ್ಲೆಗಳಿಗೆ 5 ಸಾವಿರ ಕೋಟಿ ಅನುದಾನ ನೀಡಲಾಗುವುದು. ಕಾಂಗ್ರೆಸ್ ಗೆಲುವಿನ ಸುಳಿವು ಸಿಕ್ಕ ಬಿಜೆಪಿ ಹತಾಶೆಗೊಂಡು ಹಳ್ಳಿಹಳ್ಳಿಗಳಿಗೆ ತನ್ನ ಕೇಂದ್ರ ನಾಯಕರನ್ನು ತರಿಸಿ ಸುಳ್ಳಿನ ಮೂಲಕ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದರು.
ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಸದಾಶಿವ ದೇವಾಡಿಗ ಹಾಗೂ ಚಂದ್ರ ಶೇಖರ ಬಾಯಿರಿ, ನ್ಯಾಯವಾದಿ ಶೇಖರ ಮಡಿವಾಳ, ಮಧುಕರ ಶೆಟ್ಟಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಕಾರ್ಯಕ್ರಮ ನಿರ್ವಹಿಸಿದರು.