ಕಾರು ಅಡ್ಡಗಟ್ಟಿ ಗುಂಪಿನಿಂದ ನಟಿ ಹರ್ಷಿಕಾಗೆ ಕಿರುಕುಳ

ಬೆಂಗಳೂರು: ಕನ್ನಡ ನಟಿ ಹರ್ಷಿಕಾ ಪೂಣಚ್ಚ ಕೆಲದಿನಗಳ ಹಿಂದೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿ ತನಗಾದ ಭಯಾನಕ ಅನುಭವವನ್ನು ಇಂದು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಇದು ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ನಾವೆಷ್ಟು ಸುರಕ್ಷಿತ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಹರ್ಷಿಕಾ ಪತಿ ಭುವನ್ ಪೊನ್ನಣ್ಣ ಹಾಗೂ ಕುಟುಂಬದವರ ಜತೆ ಹೋದಾಗ ಈ ಅನುಭವ ಆಗಿದ್ದು, ‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ’ ಎಂದು ಅವರು ಪೋಸ್ಟ್ ಆರಂಭಿಸಿದ್ದಾರೆ. ಅವರು ಬರೆದ ಸೋಶಿಯಲ್ ಮೀಡಿಯಾ ಪೋಸ್ಟ್ ವಿವರ ಇಲ್ಲಿದೆ.
‘ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ತೆಗೆದು ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮಗೆ ತಾಗಬಹುದು ಎಂದು ವಾದಿಸಲು ಪ್ರಾರಂಭಿಸಿದರು’.

‘ಇನ್ನೂ ವಾಹನ ಮೂವ್ ಮಾಡಿಲ್ವಲ್ಲ ಸೈಡ್‌ ಬಿಡಿ ಎಂದು ನನ್ನ ಪತಿ ಹೇಳಿದರು. ಅವರ ಮಾತಿನಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು. ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಗೆ ಹೊಡೆಯಲು ಸಹ ಪ್ರಯತ್ನಿಸಿದರು’ ಎಂದು ಘಟನೆ ಬಗ್ಗೆ ಹರ್ಷಿಕಾ ವಿವರಿಸಿದ್ದಾರೆ.
‘ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು, ಅವರು ಹೆಚ್ಚು ಪ್ರತಿಕ್ರಿಯಿಸಲಿಲ್ಲ. 2- 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20-30 ಸದಸ್ಯರ ಗುಂಪು ಜಮಾಯಿಸಿತು. ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತುಕೊಂಡು, ನಂತರ ಅದನ್ನು ಬಹಳ ಕೌಶಲದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡು ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು. ನಂತರ ಕಾರನ್ನು ಅವರು ಪುಡಿ ಮಾಡಿದರು’ ಎಂದು ಹರ್ಷಿಕಾ ಬರೆದಿದ್ದಾರೆ.

‘ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ನೀವು ನಮ್ಮ ಪ್ರದೇಶಕ್ಕೆ ಬಂದಿದ್ದೀರಾ, ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ, ಯೇ ಲೋಕಲ್ ಕನ್ನಡ್ ವಾಲಾ ಹೇ ಎನ್ನುತ್ತಿದ್ದರು. ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಹರಕುಮುರುಕು ಕನ್ನಡದಲ್ಲಿ ಮಾತನಾಡುತ್ತಿದ್ದರು. ನಾನು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು ಆದರೆ ಅವರು ಕೆಲವೇ ಸೆಕೆಂಡುಗಳಲ್ಲಿ ಗಾಳಿಯಲ್ಲಿ ಕಣ್ಮರೆಯಾದರು’ ಎಂದಿದ್ದಾರೆ ಭುವನ್.

‘ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ಎಎಸ್‌ಐ ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನೂ ತೋರಿಸಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್​ನಲ್ಲಿ ಅವರು ಕುಳಿತಿದ್ದರು’ ಎಂದು ಆರೋಪಿಸಿದ್ದಾರೆ ಹರ್ಷಿಕಾ.

‘ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ. ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ. ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು’ ಎಂದು ತಮ್ಮ ಮನದಲ್ಲಿ ಮೂಡಿದ ಪ್ರಶ್ನೆ ಬರೆದಿದ್ದಾರೆ.
ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಗಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ? ನಮ್ಮ ಊರು ಬೆಂಗಳೂರಿನಲ್ಲಿ ನನ್ನ ಭಾಷೆ ಕನ್ನಡವನ್ನು ಬಳಸುವುದು ತಪ್ಪಾ? ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ? ಇಲ್ಲಿಯೇ ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ? ಎಂದು ಹರ್ಷಿಕಾ ಕೇಳಿದ್ದಾರೆ.























































































































































error: Content is protected !!
Scroll to Top