ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಜು. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಜನಿಸಿದ ಶ್ರೀಧರ ರಾವ್‌ ಅವರು ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದಾರೆ. ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದರು.
ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿರುವ ಶ್ರೀಧರ ರಾವ್‌ರವರು ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು. ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮು ದೇವಿ, ಈಶ್ವರ, ಸೀತಾ ಪರಿತ್ಯಾಗದ ಸೀತೆ, ಲಕ್ಷ್ಮಣ, ಸುದರ್ಶನ ವಿಜಯದ ಲಕ್ಷ್ಮಿ, ವಿಷ್ಣು, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ, ದೇವಿ ಮಹಾತ್ಮೆಯ ದೇವಿ ಮೊದಲಾದ ಪಾತ್ರಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ರಾವ್‌ರವರ ಅಮ್ಮು ಬಳ್ಳಾಲ್ತಿ, ದಾಕ್ಷಾಯಿಣಿ, ಲಕ್ಷ್ಮಿ ಸುಭದ್ರೆಯ ಪಾತ್ರದ ಮೂಲಕವೂ ಅಪಾರ ಅಭಿಮಾನಿಗಳನ್ನು ಪಡೆದಿದ್ದರು.

ಕೊರಗ ಶೆಟ್ರ ಇರಾ ಮೇಳದ ಮೂಲಕ ಯಕ್ಷ ಪಯಣ ಆರಂಭಿಸಿದ್ದ ಶ್ರೀಧರ ರಾವ್‌ರವರು ಯಕ್ಷಗಾನ ದಿಗ್ಗಜ ಶೇಣಿಯವರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಮಾತ್ರವಲ್ಲದೆ ಇನ್ನೂ ಹಲವೆಡೆ ಇವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು. ಇತ್ತೀಚೆಗಷ್ಟೇ ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಜಸ್ಟೀಸ್ ಕೆ. ಜಗನ್ನಾಥ ಶೆಟ್ಟಿ ಸ್ಮಾರಕ ಪ್ರಯುಕ್ತ ಕೊಡ ಮಾಡುವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

































































error: Content is protected !!
Scroll to Top