ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಬಾಲಕಿಯರ ಮೃತದೇಹ ಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ. ಮಂಗಳವಾರ ಶಾವಂತಿ (15)ಯ ಮೃತದೇಹ ಪತ್ತೆಯಾಗಿತ್ತು. ಇಂದು (ಡಿಸೆಂಬರ್​ 11) ದೀಕ್ಷಾ (15), ಲಾವಣ್ಯ (15), ವಂದನಾ (15) ಮೃತ ದೇಹಗಳು ಪತ್ತೆಯಾಗಿವೆ. ನಾಲ್ವರೂ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದರು. ಸುಮಾರು 54 ವಿದ್ಯಾರ್ಥಿನಿಯರು ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಅಲೆಗಳ ಅಬ್ಬರ ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಟ ಆಡಲು ಬಿಟ್ಟಿದ್ದಾರೆ. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರುಪಾಲಾಗಿದ್ದರು. ಈ ಸಂದರ್ಭದಲ್ಲಿ ಲೈಫ್​ ಗಾರ್ಡಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕನನ್ನು ರಕ್ಷಣೆ ಮಾಡಿದ್ದರು. ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಸುಮೋಟೋ ಕೇಸ್​
ಕೊತ್ತೂರಿನ ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್​​​ ದಾಖಲಿಸಿಕೊಂಡಿದ್ದಾರೆ. ದುರ್ಘಟನೆಗೆ ನಿರ್ಲಕ್ಷ್ಯವೇ ಕಾರಣವೆಂದು ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಶಿಕ್ಷಕರಾದ ಆರ್.ಸುನೀಲ್, ಎಸ್.ಚೌಡಪ್ಪ, ಎಸ್.ವಿಶ್ವನಾಥ್, ಸಿ.ಎನ್.‌ಶಾರದಮ್ಮ ಮತ್ತು ಕೆ.ನರೇಶ್ ವಿರುದ್ಧ ಮುರ್ಡೇಶ್ವರ ಪೊಲೀಸರು ಕೇಸ್​ ದಾಖಲಿಸಿದ್ದಾರೆ.

ಪ್ರಾಂಶುಪಾಲೆ ಅಮಾನತು
ಕೊತ್ತೂರಿನ ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ ಅವರನ್ನು ನಿರ್ಲಕ್ಷ್ಯ, ಬೇಜವಾಬ್ದಾರಿ ಆರೋಪದಡಿ ಅಮಾನತು ಮಾಡಿ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ. ಅತಿಥಿ ಶಿಕ್ಷಕರಾದ ಚೌಡಪ್ಪ, ಶಾರದಮ್ಮ, ನರೇಶ್, ಸುನೀಲ್,‌ ವಿಶ್ವನಾಥ್, ಲಕ್ಷಮ್ಮ ಅವರನ್ನು ವಜಾ ಮಾಡಲಾಗಿದೆ.









































error: Content is protected !!
Scroll to Top