ದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 10 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್ಸ್ಟ್ರೈಕ್ ನಡೆಸಿತು. ಸುಮಾರು 100ಕ್ಕೂ ಹೆಚ್ಚು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ.
ಇದಕ್ಕೆ ಕೋಪಗೊಂಡಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಮನಬಂದಂತೆ ಜನರ ಮೇಲೆ ಗುಂಡು ಹಾರಿಸಿದೆ. ಪರಿಣಾಮ 10 ಮಂದಿ ನಾಗರಿಕರು ಸಾವನ್ನಪ್ಪಿದ್ದು 38 ಮಂದಿ ಗಾಯಗೊಂಡಿದ್ದಾರೆ. ಇದು ಭಾರತ ಹಾಗೂ ಪಾಕಿಸ್ತಾನದ ನಡುವಿರುವ ವ್ಯತ್ಯಾಸ. ಭಾರತವು ಕೇವಲ ಉಗ್ರರ ನೆಲೆ ಮೇಲೆ ದಾಳಿ ನಡೆಸಿದರೆ ಪಾಕಿಸ್ತಾನ ಮತ್ತಷ್ಟು ಅಮಾಯಕರನ್ನು ಬಲಿಪಡೆದಿದೆ. ಎಲ್ಒಸಿ ಬಳಿಯ ಹಳ್ಳಿಗಳ ಮೇಲೆ ಫಿರಂಗಿ ಮತ್ತು ಮೋರ್ಟರ್ಗಳಿಂದ ಶೆಲ್ ದಾಳಿ ನಡೆಸಲಾಯಿತು, ಇದರಲ್ಲಿ ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ.











