ಬೆಂಗಳೂರು : ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ದಾಬಸ್ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನೋವಾ ಕಾರಿನಲ್ಲಿದ್ದ ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬವರು ಅನಂತ್ ಕುಮಾರ್ ಹೆಗಡೆ ಮತ್ತವರ ಗನ್ಮ್ಯಾನ್ ಹಾಗೂ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಹೆಗಡೆ ಕಾರಿನಲ್ಲಿದ್ದ ಮೂವರನ್ನೂ ನೆಲಮಂಗಲ ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.
ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಪ್ರತಿಕ್ರಿಯಿಸಿ, ಅನಂತ್ಕುಮಾರ್ ಹೆಗಡೆ ಸೇರಿದಂತೆ ಮೂವರ ಮೇಲೆ ಎಫ್ಐಆರ್ ದಾಖಲಾಗಿದೆ, ಎ1 ಅನಂತ್ಕುಮಾರ್ ಹೆಗಡೆ, ಎ2 ಗನ್ ಮ್ಯಾನ್, ಎ3 ಚಾಲಕ ಆರೋಪಿಗಳಾಗಿದ್ದಾರೆ. ತನಿಖೆ ಮಾಡಿ ಅಗತ್ಯವಿದ್ದರೆ ಬಂಧಿಸುತ್ತೆವೆ. ಇದರೊಂದಿಗೆ ಗಾಯಾಳುಗಳ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.




























