ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು : ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಅನಿರ್ದಿಷ್ಠಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.

ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಎಲ್ಲ ಬೆಳವಣಿಗೆಯ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಇಂದಿನಿಂದ (ಆ.5) ಬೆಳಗ್ಗೆಯಿಂದಲೇ ಮುಷ್ಕರಕ್ಕಿಳಿದಿದ್ದಾರೆ. ಇದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ.

ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್‌ಗಳ ಸಂಚಾರ ಸ್ತಬ್ಧಗೊಂಡಿವೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂತೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಗೆ ಧುಮುಕಿದ್ದಾರೆ. ಆದರೆ ಕೆಲವೆಡೆ ಪ್ರಯಾಣಿಕರಿಗೆ ಬಂದ್‌ ಬಿಸಿ ತಟ್ಟಿಲ್ಲ, ಏಕೆಂದರೆ ತುರ್ತು ಕಾರ್ಯಗಳಿಗೆ ಪ್ರಯಾಣಿಕರು ಖಾಸಗಿ ಬಸ್, ಟ್ರಾವೆಲ್ಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.

ಈ ನಡುವೆ ಹೈಕೋರ್ಟ್ ಆದೇಶದ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆಗೆ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮುಷ್ಕರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಕ್ರಿಯಾ ಸಮಿತಿ ಪೂರ್ವ ನಿರ್ಧಾರದಂತೆ ಮುಷ್ಕರಕ್ಕೆ ಇಳಿದರೆ, ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದ್ದು ಪ್ರಯಾಣಿಕರಿಗೆ ಬಿಸಿ ತಟ್ಟಲಿದೆ.





























































































































error: Content is protected !!
Scroll to Top