ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಆಪರೇಷನ್ ಅಖಾಲ್ ಕಾರ್ಯಾಚರಣೆ- ಉಗ್ರರ ಗುಂಡಿಗೆ ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಆಪರೇಷನ್ ಅಖಾಲ್ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಇಂದು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಆ. 8ರ ರಾತ್ರಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ವೀರ ಯೋಧರಾದ ಕೆ ಪ್ರೀತ್ಪಾಲ್ ಸಿಂಗ್ ಮತ್ತು ರ್ಮಿಂದರ್ ಸಿಂಗ್ ಅವರ ಈ ತ್ಯಾಗಕ್ಕೆ ಅವರನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಎಕ್ಸ್​​​​ ಮೂಲಕ ಸಂತಾಪ ಸೂಚಿಸಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ, ಭದ್ರತಾ ಪಡೆಗಳು ಆಗಸ್ಟ್ 1 ರಂದು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ವರೆಗೆ ಐದು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಸೇನಾ ಮೂಲಗಳ ಪ್ರಕಾರ, ಕನಿಷ್ಠ ಮೂವರು ಭಯೋತ್ಪಾದಕರು ದಟ್ಟ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರು ನೈಸರ್ಗಿಕ ಗುಹೆಯಂತಹ ಅಡಗುತಾಣಗಳನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಭದ್ರತಾ ಪಡೆಗಳು ಉಗ್ರರಿರುವ ಜಾಗವನ್ನು ಸುತ್ತುವರಿದಿದ್ದು, ದಟ್ಟವಾದ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ.

ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದ್ದು, ಅಡಗಿರುವ ಉಗ್ರರನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆಯಲ್ಲಿ ಪ್ಯಾರಾ ಕಮಾಂಡೋಗಳು ಸಹಾಯ ಮಾಡುತ್ತಿದ್ದಾರೆ. ಅಖಾಲ್ ಗ್ರಾಮದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ. ಸ್ಥಳೀಯರಿಗೆ ಸಹಾಯ ಮಾಡಲು ಮತ್ತು ತುರ್ತು ಸಂದರ್ಭಗಳಲ್ಲಿ ಸಮನ್ವಯ ಸಾಧಿಸಲು ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಾರೆ.

ಈ ವಾರದ ಆರಂಭದಲ್ಲಿ, ಶ್ರೀನಗರದ ದಾಚಿಗಾಮ್‌ನಲ್ಲಿ ದಾಳಿಯ ಮಾಸ್ಟರ್‌ಮೈಂಡ್ ಸುಲೇಮಾನ್ ಶಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಮರುದಿನ, ‘ಆಪರೇಷನ್ ಶಿವ ಶಕ್ತಿ’ ಅಡಿಯಲ್ಲಿ ಪೂಂಚ್ ವಲಯದ ಗಡಿರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಇನ್ನಿಬ್ಬರು ಭಯೋತ್ಪಾದಕರನ್ನು ನಿಷ್ಕ್ರಿಯಗೊಳಿಸಲಾಯಿತು. ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಹಲವು ಭಯೋತ್ಪಾದಕರು ಮತ್ತು ಬೆಂಬಲಿಗರನ್ನು ಬಂಧಿಸಲಾಗಿದೆ.



































































































error: Content is protected !!
Scroll to Top