ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ ರಕ್ಷಣೆ ಕೊಡಿ – ಚಿನ್ನಯ್ಯ ದೂರು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಆಸುಪಾಸಿನ ಕಾಡಿನಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಬುರುಡೆ ತಂದ ಪ್ರಕರಣದ ಆರೋಪಿ ಮಾಸ್ಕ್‌ ಮ್ಯಾನ್ ಚಿನ್ನಯ್ಯ ಧರ್ಮಸ್ಥಳ ವಿರೋಧಿ ಹೋರಾಟಗಾರರಿಂದ ತನಗೆ ಜೀವ ಬೆದರಿಕೆ ಇದೆ, ರಕ್ಷಣೆ ಒದಗಿಸಬೇಕು ಎಂದು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.‌
ಚಿನ್ನಯ್ಯ ಡಿ.18ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ತನಗೆ ಹಾಗೂ ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಅವರಿಗೆ ಧರ್ಮಸ್ಥಳ ವಿರೋಧಿ ಹೋರಾಟಗಾರರಾದ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಜಯಂತ್, ಯುಟ್ಯೂಬರ್‌ ಸಮೀರ್ ಎಂ.ಡಿ. ಮತ್ತು ಅವರ ಸಂಗಡಿಗರಿಂದ ಜೀವ ಬೆದರಿಕೆ ಇದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಬೇಕು ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು. ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ, ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.























error: Content is protected !!
Scroll to Top