ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಸೀ ಬರ್ಡ್ ಬಸ್ ಹೊತ್ತಿ ಉರಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಯಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
























































































