ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ – ಓರ್ವನ ಬಂಧನ

ಕಾರ್ಕಳ : ಶಿರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಆರೋಪದಡಿ ದಾಖಲಾದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು ನಿವಾಸಿ ಸುಧಾಕರ(37) ಬಂಧಿತ ಆರೋಪಿ. ಈತನನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೊಂದು ಪ್ರಕರಣದ ಆರೋಪಿ ನಿಟ್ಟೆಯ ಸುದೀಪ್ ಶೆಟ್ಟಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸುದೀಪ್ ಶೆಟ್ಟಿ ಹಾಗೂ ಸುಧಾಕರ್, ಜ.3ರಂದು ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ‘ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇರಬೇಕಾದರೆ ಈ ಸೌಹಾರ್ದ ಸಮಿತಿಯವರಿಗೆ ಎಷ್ಟೋ ಕಾರ್ಯಗಳಿವೆ. ಅದನ್ನು ಬಿಟ್ಟು ಹಿಂದುಗಳ ಪರ್ಯಾಯ ಮೆರವಣಿಗೆಯಲ್ಲಿ ದಫ್‌ನಂತಹ ಕಾರ್ಯಕ್ರಮ ಮಾಡುವ ಅಗತ್ಯವಿಲ್ಲ. ಪರ್ಯಾಯದಲ್ಲಿ ಶರಬತ್, ನೀರಿನ ಬಾಟಲಿ ಹಂಚಿದ ಕೂಡಲೇ ಸೌಹಾರ್ದ ಬೆಳೆಯಲ್ಲ, ಇದರಿಂದ ಹಿಂದುಗಳಿಗೆ ನಂಬಿಕೆ ಏನು ನಿಮ್ಮ ಮೇಲೆ ಹೆಚ್ಚಲ್ಲ’ ಎಂದು ಫೋಸ್ಟ್ ಹಾಕಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.















































































































































































error: Content is protected !!
Scroll to Top