ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ಮಂಗಳೂರು ಕಮೀಷನರ್, ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಎಸ್ಪಿ ಕಾಶಿನಾಥ್ ಅವರು ಡಿಜಿಪಿ ಸಲೀಂ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.
ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಶಿನಾಥ್, ಐಪಿಎಸ್ ಅಧಿಕಾರಿಯ ಕರ್ಮಕಾಂಡಗಳನ್ನು ಬಯಲು ಮಾಡಲು ಕೇವಲ 30 ನಿಮಿಷ ಕಾಲಾವಕಾಶ ನೀಡುವಂತೆ ಕೋರಿದ್ದಾರೆ.
ಪತ್ರದಲ್ಲಿನ ಪ್ರಮುಖಾಂಶಗಳು
ಐಪಿಎಸ್ ಅಧಿಕಾರಿಗಳು ಹೇಳಿದಂತೆ ಕೇಳದಿದ್ದರೆ ಕಾರಣ ಕೇಳಿ ನೋಟಿಸ್ (ಮೆಮೊ) ನೀಡಿ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದ್ದಾರೆ ಎಂದು ಕಾಶಿನಾಥ್ ದೂರಿದ್ದಾರೆ. ಕರ್ನಾಟಕ ಮೂಲದ ಅಧಿಕಾರಿಗಳನ್ನೇ ಗುರಿ ಮಾಡಿಕೊಂಡು ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತನಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಶಿನಾಥ್ ಪತ್ರದಲ್ಲಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯೊಳಗಿನ ಆಂತರಿಕ ಸಂಘರ್ಷ ತೀವ್ರಗೊಳ್ಳುವ ಮುನ್ಸೂಚನೆ ಇದೆ.


































