ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯ

ಕಾರ್ಕಳ : ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ಇನ್ನು ದೇಶದ ಭದ್ರತೆಯನ್ನು ಕಾಪಾಡಲು ಸಾಧ್ಯವೇ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ಅವರ ಕನಸು ನುಚ್ಚುನೂರಾಗಿದೆ. ದೇಶದ ಭವಿಷ್ಯವನ್ನು ಬೆಳಗುವ ವಿದ್ಯಾರ್ಥಿಗಳ ಭವಿಷ್ಯವೇ ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಡೋಲಾಯಮಾನವಾಗಿರುವುದು ಬೇಸರದ ಸಂಗತಿ.‌ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸುವಂತಹ ಈ ಘಟನೆಗೆ ಕೇಂದ್ರ ಸರ್ಕಾರವೇ ನೇರ ಹೊಣೆಯಾಗಿದೆ. ದೇಶದ ಭದ್ರತೆಯ ಕುರಿತು ದೊಡ್ಡ ದೊಡ್ಡ ಮಾತುಗಳನ್ನಾಡುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ವಿದ್ಯಾರ್ಥಿಗಳಿಗಾಗಿ ಒಂದು ಪರೀಕ್ಷೆಯನ್ನು ಕೂಡ ಸುಸೂತ್ರವಾಗಿ ನಡೆಸಲು ಸಾಧ್ಯವಾಗತ್ತಿಲ್ಲ. ಇದು ಕೇವಲ ಬಾಯಿಬಡುಕ ಸರ್ಕಾರವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿರುವ ತಪ್ಪಿತಸ್ಥರನ್ನು ರಕ್ಷಿಸುವ ಬದಲು, ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ದೇಶದ ಜನತೆಗೆ ಉತ್ತರ ನೀಡಬೇಕು. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.













































\















error: Content is protected !!
Scroll to Top