ಉಡುಪಿ : ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೈಜ ಆರ್. ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಷನ್ ನಡೆಸುವ 18ರ ವಯೋಮಿತಿಯ ಬಾಲಕಿಯರ ವಿಭಾಗದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಭಾರತೀಯ ವಾಲಿಬಾಲ್ ತಂಡದ ಆಯ್ಕೆಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಜಾರ್ಖಂಡ್ ನರಾಂಚಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಒಟ್ಟು 24 ಕ್ರೀಡಾಪಟುಗಳು ಆಯ್ಕೆಯಾಗಿದ್ದು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಇಬ್ಬರಲ್ಲಿ ಮಣಿಪಾಲ ಜ್ಞಾನಸುಧಾದ ನೈಜ ಆರ್. ಹೆಗ್ಡೆ ಕೂಡಾ ಒಬ್ಬರಾಗಿದ್ದಾರೆ. ಮುಂದೆ ಚೀನಾದ ಶಾಂಗ್ಲೋದಲ್ಲಿ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟವು ನಡೆಯಲಿದ್ದು ಅದಕ್ಕೂ ಮೊದಲು ಭಾರತ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇವರು 2025-26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ವತಿಯಿಂದ ನಡೆದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡ 95 ಅಂಕಗಳನ್ನು ಪಡೆಯುವುದರೊಂದಿಗೆ ಪ್ರಸ್ತುತ ನ್ಯಾಷನಲ್ ಸೆಂಟರ್ ಆಫ್ಎಕ್ಸಲೆನ್ಸ್ಗೆ ಆಯ್ಕೆಯಾಗಿದ್ದು ಖೇಲೋ ಇಂಡಿಯಾ ಅಕಾಡೆಮಿಯಲ್ಲಿ ಉಚಿತ ಕ್ರೀಡಾ ತರಬೇತಿ ಮತ್ತು ಪದವಿ ಶಿಕ್ಷಣವನ್ನು ಪಡೆಯಲಿದ್ದಾರೆ.
ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯ಼ಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.












