ಮುಂಬೈ : ನೀಟ್-ಯುಜಿ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪುಣೆಯ ಸಸ್ಯಶಾಸ್ತ್ರ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ದಳ ತಿಳಿಸಿದೆ. ಬಂಧಿತ ಶಂಕಿತರ ಸಂಖ್ಯೆ ಒಂಬತ್ತಕ್ಕೇರಿದೆ.
ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಗುರುನಾಥ್ ಮಾಂಧರೆಯನ್ನು ಸಿಬಿಐ ವಿಚಾರಣೆ ನಡೆಸಿದ ನಂತರ ದೆಹಲಿಯಲ್ಲಿ ಬಂಧಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ತಜ್ಞರಾಗಿ ನೇಮಕಗೊಂಡ ನಂತರ ಅವರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಪದವಿ ಪೂರ್ವ) ಪ್ರಕ್ರಿಯೆಗಾಗಿ ಕೆಲಸ ಮಾಡಿದರು ಎಂದು ಸಿಬಿಐ ತಿಳಿಸಿದೆ. ಏಪ್ರಿಲ್ನಲ್ಲಿ, ಈ ಹಿಂದೆ ಬಂಧಿಸಲ್ಪಟ್ಟಿದ್ದ ಪುಣೆಯ ಮತ್ತೊಬ್ಬ ಆರೋಪಿ ಮನೀಶಾ ವಾಗ್ಮಾರೆ ಮೂಲಕ ಅವರು ನೀಟ್ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದರು. ಮನೆಯಲ್ಲಿ ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರದ ಪ್ರಮುಖ ಪ್ರಶ್ನೆಗಳನ್ನು ಬಹಿರಂಗಪಡಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ನೋಟ್ಬುಕ್ಗಳಲ್ಲಿ ಬರೆದುಕೊಳ್ಳುವಂತೆ ಮತ್ತು ಅವರ ಪಠ್ಯಪುಸ್ತಕಗಳಲ್ಲಿ ಗುರುತು ಹಾಕುವಂತೆ ಮಾಡಿದ್ದಾರೆ. ಹೆಚ್ಚಿನ ಪ್ರಶ್ನೆಗಳು ಮೇ 3 ರಂದು ನಡೆದ ನೀಟ್-ಯುಜಿಯ ನಿಜವಾದ ಪ್ರಶ್ನೆ ಪತ್ರಿಕೆಯೊಂದಿಗೆ ತಾಳೆಯಾಗಿದ್ದವು ಎಂದು ತನಿಖಾ ಸಂಸ್ಥೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಸಿಬಿಐ ದೇಶಾದ್ಯಂತ ಆರು ಸ್ಥಳಗಳಲ್ಲಿ ಶೋಧ ನಡೆಸಿ, ಅಪರಾಧ ದಾಖಲೆಗಳು, ಲ್ಯಾಪ್ಟಾಪ್ಗಳು, ಬ್ಯಾಂಕ್ ಸ್ಟೇಟ್ಮೆಂಟ್ಗಳು ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ವಸ್ತುಗಳ ವಿವರವಾದ ವಿಶ್ಲೇಷಣೆ ನಡೆಯುತ್ತಿದೆ.

ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿಸಲಾದ ಒಂಬತ್ತು ಆರೋಪಿಗಳು ದೆಹಲಿ, ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ ಮತ್ತು ಅಹ್ಲಿಯಾ ನಗರದವರಾಗಿದ್ದಾರೆ. ಈ ಪೈಕಿ ಐವರು ಏಳು ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪುಣೆಯಿಂದ ಬಂಧಿಸಲ್ಪಟ್ಟ ಇಬ್ಬರನ್ನು ದೆಹಲಿಗೆ ಕರೆತರಲಾಗುತ್ತಿದೆ. ಉಳಿದವರ ವಿಚಾರಣೆ ನಡೆಸಲಾಗುತ್ತಿದೆ.




























