ಕಾರ್ಕಳ : ಬೆಳ್ತಂಗಡಿ ತಾಲೂಕಿನಲ್ಲಿ ಎಸ್ಐಆರ್ ಕರ್ತವ್ಯ ನಿರ್ವಹಿಸಲು ತೆರಳಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವುದು ಖಂಡನೀಯ. ಕರ್ತವ್ಯ ನಿರ್ವಹಿಸಲು ತೆರಳಿದ ಸರಕಾರಿ ಅಧಿಕಾರಿಯನ್ನು ಜಾತಿಯ ಹೆಸರಿನಲ್ಲಿ ಅವಮಾನಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾದ ಕೃತ್ಯವೆಂದು ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ್ ದಾನಶಾಲೆ ತಿಳಿಸಿದ್ದಾರೆ.
ಜಾತಿ ನಿಂದನೆ ಮತ್ತು ಸಾಮಾಜಿಕ ಅವಮಾನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜಾತಿ ಆಧಾರಿತ ದೌರ್ಜನ್ಯ ಮತ್ತು ಅವಮಾನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೃತ್ಯವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ನ್ಯಾಯದ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಹಾಗೂ ಸರಕಾರದ ಜವಾಬ್ದಾರಿಯಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








