ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅರ್ಜಿಗಳನ್ನು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ನೀಡುವಂತೆ ಜಿಲ್ಲಾಧಿಕಾರಿ ಕರೆ

ಗಣತಿ ನಮೂನೆ ವಿತರಣೆ ಶೇ. 99.97ರಷ್ಟು ಪೂರ್ಣ

ಉಡುಪಿ : ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು ಅವುಗಳನ್ನು ಭರ್ತಿ ಮಾಡಿ ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಾರ್ವಜನಿಕರು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪಾ ಟಿ. ಕೆ. ಕರೆ ನೀಡಿದರು. ಅವರು ಜು. 14ರಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍.ಐ.ಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಣತಿ ನಮೂನೆ ವಿತರಣೆ ಶೇ. 99.97ರಷ್ಟು ಪೂರ್ಣ
ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು. ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಈಗಾಗಲೇ ಶೇ. 99.97ರಷ್ಟು ಪೂರ್ಣಗೊಂಡಿದೆ. ಸಾರ್ವಜನಿಕರು ಗಣತಿ ನಮೂನೆಗಳನ್ನು ಭರ್ತಿ ಮಾಡಿ ತ್ವರಿತವಾಗಿ ಬಿ.ಎಲ್.ಓ ಗಳಿಗೆ ನೀಡಬೇಕೆಂದರು.

ಗಣತಿ ನಮೂನೆಗಳನ್ನು ಭರ್ತಿ ಮಾಡಿ ನೀಡಿದಲ್ಲಿ ಅವುಗಳ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲು ಬಿಎಲ್ಓ ಗಳಿಗೆ ಅನುಕೂಲವಾಗಲಿದೆ. ಕೊನೆ ಗಳಿಗೆಯಲ್ಲಿ ನೀಡಿದಲ್ಲಿ ಗೊಂದಲ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಆದಷ್ಟು ಬೇಗ ಗಣತಿ ನಮೂನೆಗಳನ್ನು ನೀಡಬೇಕು ಎಂದರು.

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಜುಲೈ 14ರವರೆಗೆ ಜಿಲ್ಲೆಯಲ್ಲಿ ಒಟ್ಟು 10,63,876 ಮತದಾರರಲ್ಲಿ 1063451 ಮತದಾರರಿಗೆ ಎನ್ಯೂಮರೇಶನ್ ಫಾರ್ಮ್‌ಗಳನ್ನು ವಿತರಿಸಿ, ಶೇ.99.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ ಎಂದ ಡಿಸಿಯವರು 3,22,027 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 30.27 ರಷ್ಟು ಪ್ರಗತಿಯಾಗಿರುತ್ತದೆ. 1647 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 1166 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 396 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈವರೆಗೆ 118-ಬೈಂದೂರು, 119-ಕುಂದಾಪುರ,121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ ನೂರರಷ್ಟು ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿರುತ್ತದೆ. 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 425 ಎನ್ಯುಮರೇಷನ್ ಫಾರ್ಮ್ ಗಳ ವಿತರಣೆಗೆ ಬಾಕಿ ಇದ್ದು, ಇದು ಪ್ರತಿ ಶತ ನೂರರಷ್ಟು ಪೂರ್ಣಗೊಳ್ಳುವಂತೆ ಮಾಡುವುದು ಬಿ.ಎಲ್.ಓ ಹಾಗೂ ಬಿ.ಎಲ್.ಎ. ಗಳ ಜವಾಬ್ದಾರಿಯಾಗಿದೆ ಎಂದರು.

ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದ್ದು, ಇದರಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವವೂ ಅತ್ಯಗತ್ಯವಾಗಿದೆ ಎಂದರು. ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಫಾರ್ಮ್‍ಗಳಲ್ಲಿನ ಮೊದಲ ಭಾಗ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿಎಲ್‍ಒ ಮತ್ತು ಬಿಎಲ್‍ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟರುಗಳು ಈ ಕಾರ್ಯದಲ್ಲಿ ಸಂಪೂರ್ಣ ಸಹಕರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು.















































































































































error: Content is protected !!
Scroll to Top