ಕಾರ್ಕಳ : ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಹಿಂದು ಜಾಗರಣ ವೇದಿಕೆಯು ದೇಶ ಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನಗತ್ಯ ನಿರ್ಬಂಧ ಹೇರಿರುವುದನ್ನು ಕಾರ್ಕಳ ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂಜಾವೇ ತಾಲೂಕು ಸಂಯೋಜಕ ಸುಜಿತ್ ಸಪಲಿಗ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರವು ಉದ್ದೇಶಪೂರ್ವಕವಾಗಿ ಹಿಂದುಗಳ ಧಾರ್ಮಿಕ ಹಾಗೂ ರಾಷ್ಟ್ರಭಕ್ತಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತ್ತಿದೆ. ಹಿಂದು ಮುಖಂಡರು ಮತ್ತು ಕಾರ್ಯಕರ್ತರಿಂದ ಮಾತನಾಡುವ ಸ್ವಾತಂತ್ರ್ಯ, ಸಂಘಟಿಸುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಸುಜಿತ್ ಸಫಲಿಗ ಸ್ವತಂತ್ರ ಭಾರತದಲ್ಲಿ ಹಿಂದುಗಳಿಗೆ ಸ್ವಾತಂತ್ರ್ಯವಿಲ್ಲವೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಹಿಂದುಗಳ ಮನದಲ್ಲಿ ಮೂಡಿದೆ. ಈ ಅಕ್ರಮ ಮತ್ತು ಹಿಂದು ವಿರೋಧಿ ನೀತಿಯನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಹಿಂದು ಜಾಗರಣ ವೇದಿಕೆ ಕಾರ್ಕಳ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸುತ್ತೇವೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








































