ಬೆಂಗಳೂರು : ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರ ಹೇರಿದ್ದ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದೆ. ನಿಷೇಧ ಜಾರಿಗೆ ಬಂದ ಕೇವಲ ಎರಡು ದಿನಗಳಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟಕ್ಕೆ ಆಹಾರ ಸುರಕ್ಷತಾ ಆಯುಕ್ತರು ಒಂದು ವರ್ಷದ ನಿಷೇಧ ವಿಧಿಸಿದ್ದರು.
ತಮ್ಮ ಗಮನಕ್ಕೆ ತಾರದೆ ಈ ಆದೇಶ ಹೊರಡಿಸಿರುವುದಕ್ಕೆ ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದರು. ಈ ನಿಷೇಧದಿಂದ ಹಲವು ರೈತರಿಗೆ ನಷ್ಟ ಉಂಟಾಗಬಹುದು ಎಂಬ ಕಾರಣ ನೀಡಿ, ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಿಯೋಗವೊಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನಗೌಡ ಅವರು ನಿಯೋಗದ ನೇತೃತ್ವ ವಹಿಸಿದ್ದರು.
ಸರ್ಕಾರದ ಆದೇಶದಿಂದ ರೈತರಲ್ಲಿ ಆತಂಕ ಉಂಟಾಗಿದ್ದು, ಮಾರುಕಟ್ಟೆಯ ಮೇಲೂ ಪರಿಣಾಮ ಬೀರಬಹುದು ಎಂದು ನಿಯೋಗವು ಮುಖ್ಯಮಂತ್ರಿಗೆ ತಿಳಿಸಿತು. ಈ ನಿರ್ಧಾರದಿಂದ ಉಂಟಾಗಬಹುದಾದ ನಷ್ಟದಿಂದ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು.








































