ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು.

ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧದ ಮರಗಳ ಮಾರಾಟ, ಖರೀದಿ ಮತ್ತು ಬಳಕೆಗೆ ಸಂಬಂಧಿಸಿದಂತೆ ತಕ್ಷಣವೇ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಾಗರಿಕರು, ಸ್ವಯಂಸೇವಾ ಸಂಸ್ಥೆಗಳು ಮತ್ತು ನಿವೃತ್ತ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಸಚಿವರು ಈ ಆದೇಶ ಹೊರಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಬರುವ ಡಿಸೆಂಬರ್‌ನಲ್ಲಿ ಮತ್ತೊಂದು ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸುವುದಾಗಿ ಅವರು ತಿಳಿಸಿದ್ದಾರೆ.

ನಗರದಲ್ಲಿ ನಾಗರಿಕರು, ಸ್ವಯಂಸೇವಾ ಸಂಸ್ಥೆಗಳು, ಸ್ವಯಂಸೇವಕ ಸಂಘಟನೆಗಳು ಹಾಗೂ ನಿವೃತ್ತ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳೊಂದಿಗೆ ನಡೆದ ದಿನವಿಡೀ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ನಿರ್ದೇಶನಗಳನ್ನು ನೀಡಿದರು.
ಜನರಿಂದ ನೇರವಾಗಿ ಮಾಹಿತಿ ಪಡೆಯಲು ಹಾಗೂ ಸರ್ಕಾರ ಇನ್ನಷ್ಟು ಏನು ಮಾಡಬೇಕಿದೆ ಎಂಬುದನ್ನು ತಿಳಿದುಕೊಳ್ಳಲು ಮುಂದಿನ ಸಂವಾದ ಸಭೆಯನ್ನು ಡಿಸೆಂಬರ್‌ನಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಸಂವಾದದ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬಳಗದ ಅಧ್ಯಕ್ಷ ಅಮರ್ ನಾರಾಯಣ ಅವರು, 52 ಶ್ರೀಗಂಧ ಮಾರಾಟ ಸಂಸ್ಥೆಗಳು ಹಾಗೂ ಶ್ರೀಗಂಧ ತೈಲ ತಯಾರಿಕೆಗೆ ಪರವಾನಗಿ ಹೊಂದಿರುವ ಆರು ಸಂಸ್ಥೆಗಳು ನಡೆಸುತ್ತಿರುವ ಶ್ರೀಗಂಧದ ಮಾರಾಟ ಮತ್ತು ಖರೀದಿ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸುವ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು.
ಕಳೆದ 10 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ 2,953 ಶ್ರೀಗಂಧ ಪ್ರಕರಣಗಳು ಹಾಗೂ ಕಳೆದ ಐದು ವರ್ಷಗಳಲ್ಲಿ ಪೊಲೀಸ್ ಇಲಾಖೆಯಲ್ಲಿ 475 ಪ್ರಕರಣಗಳು ಬಾಕಿ ಉಳಿದಿವೆ ಎಂದು ಸಚಿವರಿಗೆ ತಿಳಿಸಿದರು.


ಸಂವಾದದಲ್ಲಿ ವಿವಿಧ ಸಂಘಟನೆಗಳು ಹಾಗೂ ನಾಗರಿಕರು ಮರಗಳ ಸಂರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವಂತೆ ಒತ್ತಾಯಿಸಿದರು.
ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಂದ ಮರಗಳ ಕಡಿತ ಹೆಚ್ಚುತ್ತಿರುವುದನ್ನು ಅವರು ಸಚಿವರ ಗಮನಕ್ಕೆ ತಂದರು. ಬೆಂಗಳೂರಿನಲ್ಲಿ ಸಮಗ್ರ ಮರ ಗಣತಿ ನಡೆಸುವಂತೆಯೂ ಒತ್ತಾಯಿಸಿದರು.

ಬೆಂಗಳೂರಿನ ಮೈಸೂರು ಲ್ಯಾಂಪ್ಸ್‌ಗೆ ಸೇರಿದ 20 ಎಕರೆ ಜಾಗವನ್ನು ಪಾರಂಪರಿಕ ಅರಣ್ಯ ಉದ್ಯಾನವನ ಎಂದು ಘೋಷಿಸಬೇಕು ಹಾಗೂ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಎರಡನೇ ಟ್ರೀ ಪಾರ್ಕ್ ನಿರ್ಮಿಸುವ ಪ್ರಸ್ತಾವನೆಯನ್ನು ತಡೆಹಿಡಿಯಬೇಕು ಎಂದು ನಾಗರಿಕರು ಸಲಹೆ ನೀಡಿದರು.
ನಗರ ಮತ್ತು ಹೊರವಲಯಗಳಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಎನ್‌ಜಿಒಗಳು ದೂರಿದವು.
ಸಂಸ್ಕರಿಸಿದ ನೀರಿನ ಹೊರಹರಿವಿನ ಮೇಲೆ ಸೂಕ್ತ ನಿಗಾ ಇಲ್ಲದಿರುವುದು ಹಾಗೂ ಸಂಸ್ಕರಣೆಯ ಗುಣಮಟ್ಟ ಕಳಪೆಯಾಗಿರುವುದನ್ನು ಅವುಗಳು ಆರೋಪಿಸಿದವು.
ಇದಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಈ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ವರದಿ ಪಡೆಯುವುದಾಗಿ ತಿಳಿಸಿದರು.

ಪ್ರವಾಸಿ ತಾಣಗಳಲ್ಲಿ ಕಳಪೆ ತ್ಯಾಜ್ಯ ನಿರ್ವಹಣೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸುವ ಸಾಮರ್ಥ್ಯ ನಿರ್ವಹಣೆ ಇಲ್ಲದಿರುವ ಬಗ್ಗೆಯೂ ಚರ್ಚೆ ನಡೆಯಿತು. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರವಾಸೋದ್ಯಮ ಸಚಿವರೊಂದಿಗೆ ಸಭೆ ನಡೆಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಇದೇ ವೇಳೆ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ಹೇಳಿದರು.
ನಿಷೇಧವಿದ್ದರೂ ಪಿಒಪಿ ಗಣೇಶ ಮೂರ್ತಿಗಳು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿವೆ. ಈ ವಿಚಾರವನ್ನು ತಕ್ಷಣವೇ ಪರಿಹರಿಸುವ ಅಗತ್ಯವಿದೆ ಎಂದು ಸಚಿವರು ಒತ್ತಿ ಹೇಳಿದರು.

































































error: Content is protected !!
Scroll to Top