ಉಡುಪಿ : ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ರಾಜ್ಯ ಸರಕಾರ ತುಳು ಭಾಷೆಗೆ ನೀಡಿರುವ ಈ ಮಹತ್ವದ ಆಶ್ವಾಸನೆ ಈಡೇರಿಸಬೇಕೆಂದು ವಿಶ್ವ ತುಳುವ ಮಹಾಸಭೆ ಆಗ್ರಹಿಸಿದೆ.
ತುಳುವರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಯ ಕುರಿತು ಸರ್ಕಾರ ಘೋಷಣೆ ಮಾಡಬೇಕು ಎಂದು ವಿಶ್ವ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶ್ವ ತುಳುವ ಮಹಾಸಭೆ ಇಂಟರ್ನ್ಯಾಷನಲ್ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಉಡುಪಿ ಜಿಲ್ಲಾಧ್ಯಕ್ಷ ಉದಯ ಹೆಗ್ಡೆ, ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಸಂಪುಟ ಸಭೆಯಲ್ಲಿ ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಂತೆ ವಿಶ್ವ ತುಳುವ ಮಹಾಸಭಾ ಒತ್ತಾಯ



































