ಕಾರ್ಕಳ: ನಗರದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ 2026- 27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ರೋರ್ಯಾಕ್ಟ್ ಕ್ಲಬ್ನ ಮಾಜಿ ಅಧ್ಯಕ್ಷೆ ರೇಖಾ ಉಪಾಧ್ಯಾಯ ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನಾಯಕತ್ವ ಎಂದರೆ ಅಧಿಕಾರವಲ್ಲ ಅದು ಜವಾಬ್ದಾರಿ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗೆ ಮಹತ್ವದ ವೇದಿಕೆಯಾಗಿದೆ. ವಿದ್ಯಾರ್ಥಿ ಸಂಘದ ಪ್ರತಿಯೊಬ್ಬ ಪದಾಧಿಕಾರಿಯು ತನ್ನ ಸ್ಥಾನವನ್ನು ಗೌರವದ ಸಂಕೇತವಾಗಿ ನೋಡದೆ ಸೇವೆಯ ಅವಕಾಶವಾಗಿ ನೋಡಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಕಾಲೇಜಿನ ಅಭಿವೃದ್ಧಿಗೆ ಸಹಕರಿಸಿ ಎಲ್ಲರನ್ನು ಸಮಾನವಾಗಿ ಗೌರವಿಸುವ ಮೂಲಕ ಮಾದರಿಯಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ. ಗೀತಾ ಜಿ. ಅವರು ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಚಿದಾನಂದ ಶೆಟ್ಟಿ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಇಳಾದೇವಿ, ಆಶೀಯಾ ಬಾನು ಮತ್ತು ಪಾವನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಹನ ಎಸ್. ನಾಯಕ್ ಸ್ವಾಗತಿಸಿದರು. ವೈಶ್ಣವಿ ನಿರೂಪಿಸಿದರು. ಸ್ವಾತಿ ವಂದನಾರ್ಪಣೆಗೈದರು.














































































